ಪತಿಯ ಸಾವಿಗೆ ಅತ್ತೆ-ಮಾವನ ಕಿರುಕುಳ ಕಾರಣ: ಸೌಮ್ಯಾ ಗಂಭೀರ ಆರೋಪ
ಉಡುಪಿ: ಮದುವೆಯಾದ ಒಂದೇ ತಿಂಗಳಿಗೆ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿತ್ತು. ಮಗನ ಸಾವಿಗೆ ಆತನ ಪತ್ನಿ ಸೌಮ್ಯಾ ಶೆಟ್ಟಿಯೇ ಕಾರಣ ಎಂಬ ಗಂಭೀರ ಆರೋಪವನ್ನು ಸುದೀಪ್ ಪೋಷಕರು ಮಾಡಿದ್ದರು. ಆದರೀಗ ತನ್ನ ಮೇಲಿನ ಆರೋಪಗಳಿಗೆ ಸ್ವತಃ ಸೌಮ್ಯಾ ಶೆಟ್ಟಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್ ಹೆತ್ತವರ ಆರೋಪ ಅಲ್ಲಗಳೆದಿರುವ ಈಕೆ, ಪತಿಯ ಸಾವಿಗೆ ತಾನು ಕಾರಣಳಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದೀಪ್ ಪೋಷಕರು ಹೇಳುವಂತೆ ನೆಲ್ಯಾಡಿಯಲ್ಲಿ ನಾನು ರಂಪಾಟ ಮಾಡಿಲ್ಲ. ವಿಷಯ ಹಾಕಿ ಸುದೀಪ್ರನ್ನು ಕೊಂದಿಲ್ಲ. ಬದಲಾಗಿ ಮನೆಯವರ ಕಿರುಕುಳದಿಂದಲೇ ಸುದೀಪ್ ಆತ್ಮಹತ್ಯೆ ಮಾಡಿಕೊಂಡಿರಬಹುದು. ಸುದೀಪ್ ಮೊಬೈಲ್ ಸಂಪರ್ಕಕ್ಕೆ ಸಿಗದ ಕಾರಣ ಆತಂಕಗೊಂಡು ತಾನು ನೆಲ್ಯಾಡಿಗೆ ತೆರಳಿದ್ದೆ. ಅವರು ಹೇಳುವಂತೆ ತಾನು ಯಾವುದೇ ರಂಪಾಟ ನಡೆಸಿಲ್ಲ. ಬೇಕಿದ್ದರೆ ಸಿಸಿ ಕ್ಯಾಮರಾ ದೃಶ್ಯಾವಳಿಗಳ ಪರಿಶೀಲನೆ ಮಾಡಿ. ಸುದೀಪ್ ತಾಯಿ ನನಗೆ ಕೆಟ್ಟ ಭಾಷೆಯಲ್ಲಿ ಬೈದ ಕಾರಣ ಆ ವೇಳೆ ತಾನು ಕಿರುಚಾಡಿದ್ದು ನಿಜ. ನಮ್ಮ ಮನೆಯಲ್ಲಿಯೇ ಇದ್ದ ಸುದೀಪ್ ಮಾರ್ಚ್ 16ರಂದು ನೆಲ್ಯಾಡಿಗೆ ತೆರಳಿದ್ದರು. ತಂದೆಯ ಮನೆಗೆ ಹೋದ ನಂತರ ನನಗೆ ಸಮಸ್ಯೆ ಆಗಿದೆ. ನನ್ನ ಮನೆಯಲ್ಲಿ ಮದುವೆಗೆ ಒಪ್ಪುತ್ತಿಲ್ಲ ಎಂದಿದ್ದರು. ಒಂದು ವೇಳೆ ಅವರು ಒಪ್ಪದಿದ್ದರೆ ನಿಮ್ಮ ಮನೆಯಲ್ಲಿ ಒಪ್ಪುತ್ತಾರಲ್ಲ ಎಂದು ಕೇಳಿದ್ದರು. ತಂದೆಯ ಮನೆಗೆ ಹೋಗಿ ಬಂದ ನಂತರ ಆತ್ಮಹತ್ಯೆ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಅವರ ಮನೆಯವರೇ ಆತ್ಮಹತ್ಯೆಗೆ ಪ್ರಚೋದನೆ ನೀಡಿರಬೇಕು ಎಂದು ಸೌಮ್ಯಾ ಆರೋಪಿಸಿದ್ದಾರೆ.
ಪತಿಯ ಸಾವಿಗೆ ಅತ್ತೆ-ಮಾವನ ಕಿರುಕುಳ ಮತ್ತು ವೇಣು ಶೆಟ್ಟಿಯ ಪ್ರಚೋದನೆಯೇ ಕಾರಣ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಸುದೀಪ್ ಪೋಷಕರು ಹಾಗೂ ವೇಣು ಶೆಟ್ಟಿ ವಿರುದ್ಧ ಕಾರ್ಕಳ ಠಾಣೆಯಲ್ಲಿ ದೂರು ದಾಖಲಿಸಿರೋದಾಗಿ ತಿಳಿಸಿದ್ದಾರೆ.
ಕಾಮೆಂಟ್ ಬಿಡಿ