ಕೆ.ಅಣ್ಣಾಮಲೈ ಹೊಸ ರಾಜಕೀಯ ಪಕ್ಷ ಆರಂಭಿಸಲು ತೆರೆಮರೆಯಲ್ಲಿ ಸಿದ್ಧತೆ
ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗುವ ಮುನ್ಸೂಚನೆ ದೊರೆತಿದೆ. ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೊಸ ರಾಜಕೀಯ ಪಕ್ಷ ಆರಂಭಿಸಲು ತೆರೆಮರೆಯಲ್ಲಿ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸಮಾನ ಮನಸ್ಕರನ್ನು ಒಗ್ಗೂಡಿಸಿ, ಬಲಿಷ್ಠ ಸ್ವಯಂಸೇವಕರ ಪಡೆಯನ್ನು ಕಟ್ಟುವ ಉದ್ದೇಶವನ್ನು ಅವರು ಹೊಂದಿದ್ದಾರೆ ಎನ್ನಲಾಗಿದೆ. ಈ ನೂತನ ಸಂಘಟನೆಗೆ 'ಮಕ್ಕಳ್ ಶಕ್ತಿ ಇಯಕ್ಕಂ' (ಜನಶಕ್ತಿ ಚಳವಳಿ) ಎಂದು ಹೆಸರಿಡಲು ತೀರ್ಮಾನಿಸಲಾಗಿದೆ ಎಂಬ ವದಂತಿಗಳು ರಾಜಕೀಯ ವಲಯದಲ್ಲಿ ದಟ್ಟವಾಗಿ ಹರಿದಾಡುತ್ತಿವೆ.
ಸಿಬಿಎಸ್ಇ 9ನೇ ತರಗತಿ ವಿದ್ಯಾರ್ಥಿಗಳಿಗೆ ಜಾರಿಗೊಳಿಸಿರುವ ತ್ರಿಭಾಷಾ ನೀತಿಯ ವಿಚಾರದಲ್ಲಿ ಅಣ್ಣಾಮಲೈ ಅವರು ಕೇಂದ್ರ ಸರ್ಕಾರದ ನಿಲುವಿಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ನೀತಿಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದ ಅವರು, ಇದು ತಮಿಳುನಾಡಿನ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಅನಗತ್ಯ ಮಾನಸಿಕ ಒತ್ತಡ ಉಂಟುಮಾಡುತ್ತಿದೆ ಎಂದು 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.
ಕರ್ನಾಟಕದಲ್ಲಿ ದಕ್ಷ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ರಾಜೀನಾಮೆ ನೀಡಿದ್ದ ಅಣ್ಣಾಮಲೈ, 2020ರಲ್ಲಿ ರಾಜಕೀಯ ಪ್ರವೇಶಿಸಿದ್ದರು. ಎಲ್. ಮುರುಗನ್ ಅವರ ಬಳಿಕ 2021ರಲ್ಲಿ ತಮಿಳುನಾಡು ಬಿಜೆಪಿಯ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು 2025ರವರೆಗೆ ಮುನ್ನಡೆಸಿದ್ದರು.
ಕಾಮೆಂಟ್ ಬಿಡಿ